ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮೇ 01
ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ನಾಲ್ಕು ಕೋಡ್ಗಳನ್ನಾಗಿ ವಿಂಗಡಿಸಿ ಹಕ್ಕುಗಳನ್ನು ಕಸಿದುಕೊಂಡಿವೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಕಾರ್ಮಿಕರು ಒಗ್ಗೂಡಿ ಫ್ಯಾಸಿಸ್ಟ್ ಶಕ್ತಿಗಳನ್ನು ಕಿತ್ತೊಗೆಯುವ ಮೂಲಕ ರಾಜ್ಯಾಧಿಕಾರವನ್ನು ಹಿಡಿಯಬೇಕು ಎಂದು ಎಐಸಿಸಿಟಿಯು ಮುಖಂಡ ಬಸವರಾಜ ಎಕ್ಕಿ ಕರೆ ನೀಡಿದರು.
ನಗರದ ಗಾಂಧಿ ಸರ್ಕಲ್ನಲ್ಲಿ ಎಐಸಿಸಿಟಿಯು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಗುರುವಾರ ಮಾತನಾಡಿದರು. ಕಳೆದ ದಶಕದಿಂದ ಕಾರ್ಮಿಕರು ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕುಟುಂಬಗಳು ಬೀದಿಗೆ ಬಿದ್ದಿವೆ. ದೈನಂದಿನ ಅಗತ್ಯ ವಸ್ತುಗಳ ಬೆಲೆ, ನಿರುದ್ಯೋಗ, ಅಸಮಾನ ಹಂಚಿಕೆಯಿAದ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಎಕ್ಕಿ ಆಕ್ರೋಶ ವ್ಯಕ್ತಪಡಿಸಿದರು.
ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದುಗೊಳಿಸಬೇಕು, 42 ಸಾವಿರ ರೂಪಾಯಿ ಕನಿಷ್ಠ ವೇತನ ಜಾರಿಗೊಳಿಸಬೇಕು, ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳಿಗೆ ಬಸವರಾಜ ಎಕ್ಕಿ ಆಗ್ರಹಿಸಿದರು.
ಭಗತ್ ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ ಎಐಸಿಸಿಟಿಯುನ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂಎಲ್) ಲಿಬರೇಶನ್ನ ರಾಜ್ಯ ಸಮಿತಿ ಸದಸ್ಯ ನಾಗರಾಜ್ ಪೂಜಾರ್ ಸೇರಿದಂತೆ ಪೌರಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರ ಹಾಗೂ ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಮಹಿಳೆಯರು ಇದ್ದರು.
