ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 26
ತಾಲೂಕಿನ ಸೋಮಲಾಪುರ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಶುಕ್ರವಾರ ಭೇಟಿ ನೀಡಿ, ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಕೆಲಸ ಕಾರ್ಯಗಳ ಪರಿಶೀಲನೆ ನಡೆಸಿ, ಬಾಕಿ ಕೆಲಸಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಜನವರಿ 2, 2026ರಿಂದ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸುಕ್ಷೇತ್ರಕ್ಕೆ ಭೇಟಿ ನಿಡಿದರು. ಭಕ್ತಾಧಿಗಳಿಗೆ ದೇವಿಯ ದರ್ಶನವಕಾಶಕ್ಕೆ ಸುಸಜ್ಜಿತ ವ್ಯವಸ್ಥೆ ಕೈಗೊಳ್ಳುವುದು, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ಆರೋಗ್ಯ ಜಾಗೃತಿ, ಸ್ವಚ್ಛತೆ, ಪೊಲೀಸ್ ಬಂದೋಬಸ್ತ್, ಸಹಾಯವಾಣಿ ಸೇರಿದಂತೆ ಹೀಗೆ ಹಲವು ಕೆಲಸ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಕೆಲಸ ಚುರುಕುಗೊಳಿಸುವಂತೆ ನಿರ್ದೇಶಿಸಿದರು.

ತಹಸೀಲ್ದಾರ್ ಅರುಣ್ಕುಮಾರ್ ದೇಸಾಯಿ ಅವರು, ಈ ಬಾರಿ ಅಂಬಾದೇವಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸುವ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಕೈಗೊಂಡ ಕೆಲಸ ಕಾರ್ಯಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂಡೂ, ತಾ.ಪಂ.ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರAಗ ಇಟಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಇದ್ದರು.


