ಲೋಕಲ್ ನ್ಯೂಸ್ ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 06, 2026
ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಒದಗಿಸುವ ಹಿನ್ನೆಲೆಯಲ್ಲಿ ಎಸ್ಎಫ್ಸಿ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅನುದಾನದ ಅಡಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕ ಹಂಪನಗೌಡ ಬಾದರ್ಲಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತ್ವರಿತಗತಿಯಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳುವುದು ಹಾಗೂ ನಿಗದಿಪಡಿಸಿದ ಅವಧಿಯಲ್ಲಿ ಪೂರ್ಣಗೊಳಿಸುವ ಕುರಿತಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಹೆಚ್ಚುತ್ತಿರುವ ನೀರಿನ ಬೇಡಿಕೆ
ನಗರದಲ್ಲಿ ಜೂನ್ 2024ರಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಕಾಡಿತ್ತು. 15ಕ್ಕೂ ಹೆಚ್ಚು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು, ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಗರಸಭೆಗೆ ಮುತ್ತಿಗೆ ಹೋರಾಟ ಹಮ್ಮಿಕೊಂಡಿತ್ತು. ತದನಂತರ ಎಚ್ಚೆತ್ತ ನಗರಸಭೆ 2025ರಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿತ್ತು. ಈ ಕುರಿತು ಶಾಸಕರನ್ನು ಹೋರಾಟ ಸಮಿತಿ ಗಮನ ಸೆಳೆದಾಗ ಕುಡಿಯುವ ನೀರಿನ ನಿರ್ಮಾಣಕ್ಕೆ ಸರ್ಕಾರದ ಗಮನ ಸೆಳೆದಿರುವುದಾಗಿ ತಿಳಿಸಿದ್ದನ್ನು ಸ್ಮರಿಸಬಹುದು.
2011 ಜನಗಣತಿಯಂತೆ ನಗರದಲ್ಲಿ 75 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪ್ರಸ್ತುತ 2026ರಲ್ಲಿ ಅದರ ಪ್ರಮಾಣ ಏರಿಕೆಯಾಗಿದೆ. ಜನವಸತಿ ಆಧರಿಸಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ನಗರಸಭೆ ಆದ್ಯತೆ ನೀಡಬೇಕಿದೆ.

