ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 25
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ, “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025”ವನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಇದನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ವಿಧೇಯಕ ಭಾರತದ ಸಂವಿಧಾನಕ್ಕೆ ವಿರುದ್ಧವಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ.ಕರಿಯಪ್ಪ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಿದ್ದರಾಮೇಶ ಮನ್ನಾಪುರ, ಮುಖಂಡರಾದ ಎಂ.ದೊಡ್ಡ ಬಸವರಾಜ, ವೆಂಕೋಬ ನಾಯಕ ರಾಮತ್ನಾಳ, ಅಮರೇಶ ರೈತನಗರಕ್ಯಾಂಪ್, ಪರಮೇಶಪ್ಪ ಹಾದಿಮನಿ, ರವಿ ರಾಠೋಡ್, ಮುತ್ತು ಬರ್ಸಿ, ಮಲ್ಲಿಕಾರ್ಜುನರೆಡ್ಡಿ ಸಾಸಲಮರಿ, ಫಕೀರಪ್ಪ ಬಾಗೋಡಿ, ನಾಗರಾಜ ದೇವರಗುಡಿ, ಕಾಶೀನಾಥ, ಕೃಷ್ಣ ರಾಠೋಡ್, ಮಲ್ಲಿಕಾರ್ಜುನ ಕಾಟಗಲ್, ರವಿ ಈಡಿಗ, ವೆಂಕಟೇಶ ಬಾದರ್ಲಿ, ರಾಮಕೃಷ್ಣ ಉಪ್ಪಾರ, ಹುಚ್ಚಪ್ಪ ದೇವರಮನಿ, ಸೂಗಯ್ಯಸ್ವಾಮಿ ಸೇರಿದಂತೆ ಇನ್ನಿತರೆ ಮುಖಂಡರು ಇದ್ದರು.
