ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮೇ 14, 2026
ನಗರದ ಪಿಡಬ್ಲ್ಯುಡಿ ಕ್ಯಾಂಪ್ನ ಜಯನಗರ 4ನೇ ಅಡ್ಡರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್ನ ಚರಂಡಿ ನೀರನ್ನು ಉದ್ಯಾನವನಕ್ಕೆ ಹರಿಸಲಾಗುತ್ತಿದ್ದು, ಇದರಿಂದ ಹೊಂಡ ನಿರ್ಮಾಣವಾಗಿ ಸುತ್ತಲೂ ದುರ್ನಾತ ಹರಡಿದ್ದು, ಸುತ್ತಮುತ್ತಲಿನ ನಿವಾಸಿಗಳು ಬೇಸತ್ತಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿನಿಯರು, ಸಾರ್ವಜನಿಕರಿಗೆ ಡೆಂಗೆ ಜ್ವರದ ಭೀತಿ
ಹಾಸ್ಟೆಲ್ನ ಸ್ನಾನಗೃಹದ ನೀರು ಹಾಗೂ ಇನ್ನಿತರೆ ಬಳಕೆ ನೀರು ಸುಗಮವಾಗಿ ಹೊರ ಹೋಗಲು ಚರಂಡಿ ವ್ಯವಸ್ಥೆಯನ್ನು ಕಲ್ಪಿಸದೇ ಪೈಪ್ ಮೂಲಕ ವಸತಿ ನಿಲಯದ ಪಕ್ಕದಲ್ಲಿರುವ ಸಾರ್ವಜನಿಕ ಉದ್ಯಾನವನಕ್ಕೆ ಹರಿಬಿಡಲಾಗಿದ್ದು ಕೆರೆಯಂತೆ ನಿರ್ಮಾಣವಾಗಿದೆ. ಇದರಿಂದ ಹೊರಡುವ ದುರ್ವಾಸನೆ ಹಾಗೂ ಸೊಳ್ಳೆ ಕಾಟದಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿನಿಯರಿಗೆ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಹಾಸ್ಟೆಲ್ನ ವಿದ್ಯಾರ್ಥಿನಿಯರು ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಡೆಂಗೆ ಜ್ವರದ ಭೀತಿ ಕಾಡುತ್ತಿದ್ದು, ಕೂಡಲೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.
