ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 19, 2026
ನಗರದಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಹಾಗೂ ಆರೋಪಿಗೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್ಮೆಂಟ್ನಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜಮಾಅತೆ ಇಸ್ಲಾಮಿ ಹಿಂದ್ನ ಹುಸೇನ್ಸಾಬ್, “ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಕೃತ್ಯ ನಾಗರಿಕ ಸಮಾಜಕ್ಕೆ ಕಳಂಕವಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕಿದೆ. ದುಷ್ಕೃತ್ಯ ಎಸಗಿದ ತಪ್ಪಿತಸ್ಥನ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ನೀಡದೆ ಪೋಕ್ಸೋ ಸೇರಿದಂತೆ ಅನ್ವಯವಾಗುವ ಎಲ್ಲಾ ಕಾನೂನುಗಳ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.
ಮನುಜಮತ ಬಳಗದ ಬಸವರಾಜ್ ಬಾದರ್ಲಿ ಮಾತನಾಡಿ, “ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಈ ಘಟನೆ ಅತ್ಯಂತ ಖಂಡನೀಯವಾಗಿದೆ. ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಾಲಕಿಯರು ಮತ್ತು ಮಹಿಳೆಯರು ಭಯಮುಕ್ತ ವಾತಾವರಣದಲ್ಲಿ ಬದುಕುವಂತಹ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು” ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಾಲಿಡಾರಿಟಿ ಯೂತ್ ಮೂವ್ಮೆಂಟ್ನ ಜಿಲ್ಲಾ ಅಧ್ಯಕ್ಷ ಡಾ.ವಾಸಿಂ, ತಾಲ್ಲೂಕು ಅಧ್ಯಕ್ಷ ಅಬುಲೈಸ್ ನಾಯ್ಕ್, ಉಪಾಧ್ಯಕ್ಷ ಇಸ್ಮಾಯಿಲ್, ನಯೀಮ್ ಇರ್ಫಾನ್, ಕಾರ್ಯದರ್ಶಿ ಎಸ್ಐಒ ಜಿಲ್ಲಾ ಅಧ್ಯಕ್ಷ ಇಮ್ತಿಯಾಜ್, ಎಸ್ಐಒ ತಾಲೂಕು ಅಧ್ಯಕ್ಷ ಅಫ್ಜಲ್ ಹುಸೇನ್, ಖಾಜಾ ಪಾಷಾ ಗೋಡೇಕಟ್, ತನ್ವೀರ್, ಅಜರ್ ಹುಸೇನ್, ಫಾರೂಕ್ ಅತ್ತಾರ್, ಸನಾವುಲ್ಲಾ, ಉಸ್ಮಾನ್ ಇನ್ನಿತರರಿದ್ದರು.
