ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 15
ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಬೇಕಾಗುವ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕೊರತೆಯಾಗದಂತೆ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರುಕಟ್ಟೆಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 23ರಂದು ಬೆಳಿಗ್ಗೆ 10 ಗಂಟೆಗೆ ಗಂಗಾವತಿ ರಸ್ತೆಯ ಯಲಿಮಂಚಾಲಿ ವಾಸುದೇವರಾವು ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚೂನಪ್ಪ ಪೂಜೇರಿ ಬಣ) ರಾಜ್ಯಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರೈತ ಮುಖಂಡ ಶರಣಪ್ಪ ಮರಳಿ ತಿಳಿಸಿದ್ದಾರೆ.
ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜೇರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ತಾಲೂಕು ಘಟಕದ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ, ಹೊಸ ಐಪಿ ಕನೆಕ್ಷನ್ ಆರ್ಆರ್ ನಂಬರ್ ನೀಡಲು ಸರ್ಕಾರದ ತಡೆಯಾಜ್ಞೆ ವಾಪಸ್ ಪಡೆಯಬೇಕು, ತೊಗರಿ, ಭತ್ತ, ಹತ್ತಿ, ಕಬ್ಬು, ಮೆಣಿಸಿನಕಾಯಿ, ಜೋಳ, ರಾಗಿ ಹಾಗೂ ವಿವಿಧ ಬೆಳೆಗಳಿಗೆ ಯೋಗ್ಯವಾದ ಬೆಲೆ (ಎಂಎಸ್ಪಿ) ನೀಡಬೇಕು, ಡಾ.ಎಂ.ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು, ರೈತರಿಗೆ ಮಾರಕವಾದ ಭೂ ಸುಧಾರಣೆ ಕಾಯ್ದೆಯನ್ನು ರಾಜ್ಯ ಸರಕಾರ ವಾಪಸ್ ಪಡೆಯಬೇಕು, ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು, ರೈತರ ಹೊಲಗಳಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ, ವಹಿವಾಟು ರಸ್ತೆ ಒದಗಿಸುವುದು, 60 ವರ್ಷದ ರೈತರಿಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಪಿಂಚಣಿ ನೀಡಬೇಕು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.